
ನಿಂದಕರಿರಬೇಕಿರಬೇಕು
ಹಂದಿಯಿದ್ದರೆ ಕೇರಿ ಹ್ಯಾಂಗೆ ಶುದ್ದಿಯೋ ಹಾಂಗೆ
ಹಂದಿಯಿದ್ದರೆ ಕೇರಿ ಹ್ಯಾಂಗೆ ಶುದ್ದಿಯೋ ಹಾಂಗೆ
ಅಂದಂದು ಮಾಡಿದ ಪಾಪವೆಂಬ ಮಲ
ತಿಂದು ಹೋಗುವರಯ್ಯ ನಿಂದಕರು
ವಂದಿಸಿ ಸ್ತುತಿಸುವ ಜನರೆಲ್ಲರು ನಮ್ಮ
ಪೊಂದಿದ ಪುಣ್ಯವನೊಯ್ಯುವರಯ್ಯ
ದುಷ್ಟಜನರು ಈ ಸೃಷ್ಟಿಯೊಳಿದ್ದರೆ
ಶಿಷ್ಟ ಜನರಿಗೆಲ್ಲ ಕೀರ್ತಿಗಳು
ಇಷ್ಟಪ್ರದ ಶ್ರೀಕೃಷ್ಣ ನಿನ್ನೊಳು
ಇಷ್ಟೇ ವರವನು ಬೇಡುವೆನಯ್ಯ
ದುರುಳ ಜನಂಗಳು ಚಿರಕಾಲವಿರುವಂತೆ
ಕರವ ಮುಗಿದು ವರವ ಬೇಡುವೆನು
ಪರಿಪರಿ ತಮಸಿಗೆ ಗುರಿಯಹರಲ್ಲದೆ
ಪರಮ ದಯಾನಿಧೆ ಪುರಂದರವಿಠಲ
No comments:
Post a Comment