ರಂಗನಾಯಕ ರಾಜೀವಲೋಚನ

ರಂಗನಾಯಕ ರಾಜೀವಲೋಚನ
ರಮಣನೆ ಬೆಳಗಾಯಿತೇಳೆನ್ನುತ
ಅಂಗನೆ ಲಕುಮಿ ತಾ ಪತಿಯೆನೆಬ್ಬಿಸಿದಳು
ಶೃಂಗಾರದ ನಿದ್ರೆ ಸಾಕೆನ್ನುತ

ಪಕ್ಷಿರಾಜನು ಬಂದು ಬಾಗಿಲೊಳಗೆ ನಿಂದು
ಅಕ್ಷಿ ತೆರೆದು ಬೇಗ ಈಕ್ಷಿಸೆಂದು
ಪಕ್ಷಿಜಾತಿಗಳೆಲ್ಲ ಚಿಲಿಪಿಲಿಗುಟ್ಟುತ್ತ
ಸುಕ್ಷ್ಮದಲಿ ನಿನ್ನನು ಸ್ಮರಿಸುವವೊ ಕೃಷ್ಣ

ಸನಕ ಸನಂದನ ಸನತ್ಸುಜಾತರು ಬಂದು
ವಿನಯದಿಂ ಕೈಮುಗಿದು ಓಲೈಪರು
ಘನ ಶುಕ ಶೌನಕ ವ್ಯಾಸ ವಾಲ್ಮೀಕರು 
ನೆನೆದು ಕೊಂಡಾಡುವರೊ ಹರಿಯೆ

ಸುರರು ಕಿನ್ನರರು ಕಿಂಪುರುಷರು ಉರಗರು 
ಪರಿಪರಿಯಲಿ ನಿನ್ನ ಸ್ಮರಿಸುವರು
ಅರುಣನು ಬಂದುದಯಾಚಲದಲಿ ನಿಂದ
ಕಿರಣ ತೋರುವ ಭಾಸ್ಕರನು ಶ್ರೀಹರಿಯೆ

ಪದುಮನಾಭನೆ ನಿನ್ನ ನಾಮಾಮೃತವನ್ನು
ಪದುಮಾಕ್ಷಿಯರು ತಮ್ಮ ಮನೆಯೊಳಗೆ
ಉದಯದೊಳೆದ್ದು ಸವಿದಾಡುತ್ತ ಪಾಡುತ್ತ
ದಧಿಯ ಕಡೆವರೇಳು ಮಧುಸೂದನನೆ ಕೃಷ್ಣ

ಮುರಮಥನನೆ ನಿನ್ನ ಚರಣದ ಸೇವೆಯ
ಕರುಣಿಸಬೇಕೆಂದು ತರುಣಿಯರು
ಪರಿಪರಿಯಿಂದಲಿ ಸ್ಮರಿಸಿ ಹಾರೈಪರು
ಪುರಂದರವಿಠಲ ನೀನೇಳೊ ಹರಿಯೆ

ರಾಗ: ಮೋಹನ            ತಾಳ: ಅಟ್ಟ

1. ಈ ಕೀರ್ತನೆ ಕೇಳಲು ಇಲ್ಲಿ ಕ್ಲಿಕ್ ಮಾಡಿ

2. ಈ ಕೀರ್ತನೆ ಕೇಳಲು ಇಲ್ಲಿ ಕ್ಲಿಕ್ ಮಾಡಿ

No comments: